ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನವದೆಹಲಿಯ ಎಐಸಿಸಿ ಮುಖ್ಯ ಕಛೇರಿಯಲ್ಲಿ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆ ಆರಂಭವಾಗಿದೆ.
ಈ ಸಭೆಯಲ್ಲಿ ರಾಜ್ಯ ನಾಯಕತ್ವ ಹಾಗೂ ಪ್ರಕಾಶ್ ಮೋಹನ್ ನೇತೃತ್ವದ ಸ್ಕ್ರೀನಿಂಗ್ ಕಮಿಟಿ ಶಿಫಾರಸು ಮಾಡಿರುವ ಪಟ್ಟಿ ಬಗ್ಗೆ ವಿಸ್ತೃತ ಚರ್ಚೆ ನಡೆಯಲಿದೆ. ರಾಜ್ಯ ನಾಯಕತ್ವದಿಂದ ಶಿಫಾರಸಾಗಿರುವ ಒಂಟಿ ಅಭ್ಯರ್ಥಿ ಇರುವ ಕ್ಷೇತ್ರಗಳ ಬಗ್ಗೆ ಚುನಾವಣಾ ಸಮಿತಿ ತನ್ನ ನಿರ್ಣಯ ನೀಡಲಿದ್ದು, ಇಂದು ಅಥವಾ ಮಾರ್ಚ್ 20 ಕ್ಕೆ ಮೊದಲ ಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ.
ಚುನಾವಣಾ ಸಮಿತಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್, ಡಾ ಜಿ ಪರಮೇಶ್ವರ್, ಎಂಬಿ ಪಾಟೀಲ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಪಾಲ್ಗೊಂಡಿದ್ದಾರೆ.
ಸಭೆಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಎಕೆ ಆಂಟನಿ, ಅಂಬಿಕಾ ಸೋನಿ, ಕೆಸಿ ವೇಣುಗೋಪಾಲ್, ಗಿರಿಜಾ ವ್ಯಾಸ್, ಎಂ ವೀರಪ್ಪ ಮೊಯ್ಲಿ ಮೊದಲಾದ ಹಿರಿಯ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದಾರೆ.