ನವದೆಹಲಿ : ರೈಲ್ವೆ ಇಲಾಖೆಯಲ್ಲಿ ಉದ್ಯೋಗಕ್ಕಾಗಿ ಭೂಮಿ ಪಡೆದ ಆರೋಪ ಹಗರಣದ ಸಂಬಂಧ ಆರ್ಜೆಡಿ ಮುಖ್ಯಸ್ಥ ಮತ್ತು ಮಾಜಿ ಸಿಎಂ ಲಾಲು ಪ್ರಸಾದ್ ಅವರನ್ನು ವಿಚಾರಣೆಗೆ ಒಳಪಡಿಸಿ, ಕಾನೂನು ಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇ.ಡಿ. (ಜಾರಿ ನಿರ್ದೇಶನಾಲಯ) ಅನುಮತಿ ನೀಡಿದ್ದಾರೆ.
ಸಿಆರ್ಪಿಸಿಯ ಸೆಕ್ಷನ್ 197(1) ಮತ್ತು ಬಿಎನ್ಎಸ್ಎಸ್, 2023 ರ ಸೆಕ್ಷನ್ 218 ರ ಅಡಿಯಲ್ಲಿ ಕಡ್ಡಾಯವಾಗಿ ವಿಚಾರಣೆಗ ಒಳಪಡಿಸುವಂತೆ ಮುರ್ಮು ಅವರು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಜಾರಿ ನಿರ್ದೇಶನಾಲಯ ಕಳೆದ ವರ್ಷ ಆಗಸ್ಟ್ನಲ್ಲಿ ಲಾಲು ಮತ್ತವರ ಪುತ್ರ ಹಾಗೂ ಮಾಜಿ ಡಿಸಿಎಂ ತೇಜಸ್ವಿ ಯಾದವ್ ಮತ್ತು ಇತರ ಕುಟುಂಬ ಸದಸ್ಯರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಕುರಿತಂತೆ ದೆಹಲಿಯ ವಿಶೇಷ ಪಿಎಂಎಲ್ಎ ಕೋರ್ಟ್ಗೆ ಆರೋಪಪಟ್ಟಿ ಸಲ್ಲಿಸಿತ್ತು.
2004-2009ರ ಅವಧಿಯಲ್ಲಿ ಭಾರತೀಯ ರೈಲ್ವೆಯಲ್ಲಿ ಗ್ರೂಪ್ ಡಿ ಬದಲಿ ಅಧಿಕಾರಿಗಳ ನೇಮಕಾತಿಯಲ್ಲಿ ಆಗ ಕೇಂದ್ರ ರೈಲ್ವೆ ಸಚಿವರಾಗಿದ್ದ ಲಾಲು ಪ್ರಸಾದ್ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಿಸಿ ಸಿಬಿಐ ಎಫ್ಐಆರ್ ದಾಖಲಿಸಿತ್ತು. ರೈಲ್ವೆಯಲ್ಲಿ ಉದ್ಯೋಗ ಕೊಡಿಸುವುದಕ್ಕೆ ಪ್ರತಿಯಾಗಿ ಭೂಮಿಯನ್ನು ವರ್ಗಾಯಿಸಲು ಅಭ್ಯರ್ಥಿಗಳು ಅಥವಾ ಅವರ ಕುಟುಂಬ ಸದಸ್ಯರಿಗೆ ಲಂಚದ ರೂಪದಲ್ಲಿ ಬೇಡಿಕೆ ಇಡಲಾಗಿತ್ತು ಎಂದು ಸಿಬಿಐ ಉಲ್ಲೇಖಿಸಿತ್ತು. ಈ ಪ್ರಕರಣದಲ್ಲಿ ಸಿಬಿಐ ಮೂರು ದೋಷಾರೋಪಟ್ಟಿಗಳನ್ನು ಸಹ ಸಲ್ಲಿಸಿತ್ತು.