ಬೆಂಗಳೂರು: ಲೋಕಸಭಾ ಚುನಾವಣೆ ಮುಕ್ತಾಯಗೊಂಡ ನಂತರ ಮೊದಲ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ರಾಜ್ಯ ಬಿಜೆಪಿ ಇಂದು ಆಯೋಜನೆ ಮಾಡಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಸಭೆಯಲ್ಲಿ ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಪಕ್ಷವು ನಿರ್ಣಯವನ್ನು ಅಂಗೀಕರಿಸಲಿದೆ.
ಲೋಕಸಭೆ ಚುನಾವಣೆಯ ನಂತರ ರಾಜ್ಯ ಬಿಜೆಪಿಯ ಮೊದಲ ಕಾರ್ಯಕಾರಿ ಸಮಿತಿ ಸಭೆ ಇದಾಗಿದೆ. ನಾಳೆ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಪರಾಭವಗೊಂಡ ಅಭ್ಯರ್ಥಿಗಳೊಂದಿಗೆ ಬಿಜೆಪಿ ಎರಡು ದಿನಗಳ ಪರಿಶೀಲನಾ ಸಭೆ ನಡೆಸಲಿದೆ.
ಕಾರ್ಯಕಾರಿಣಿಯಲ್ಲಿ ಪ್ರಮುಖವಾಗಿ ಎರಡು ನಿರ್ಣಯ ತೆಗೆದುಕೊಳ್ಳಲಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರ ಮೂರನೇ ಬಾರಿ ಅಧಿಕಾರ ಸ್ವೀಕರಿಸಿದೆ. ಮೋದಿ ಅವರಿಗೆ ಅಭಿನಂದನೆ ಸಲ್ಲಿಸಲಿದ್ದು, ರಾಜ್ಯ ಸರ್ಕಾರದ ವೈಫಲ್ಯಗಳ ಬಗ್ಗೆ ಎರಡನೇ ನಿರ್ಣಯ ಕೈಗೊಳ್ಳಲಿದೆ. ಬೆಲೆ ಏರಿಕೆ, ಆಡಳಿತ ವೈಫಲ್ಯ, ಭ್ರಷ್ಟಾಚಾರ, ಸಿಎಂ ರಾಜೀನಾಮೆ ಕೊಡುವವರೆಗೂ ಹೋರಾಟ ನಿಲ್ಲಿಸಬಾರದು ಅಂತ ನಿರ್ಣಯ ಕೈಗೊಳ್ಳಲಿದ್ದಾರೆ.
ಈ ಬಗ್ಗೆ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ರಾಜ್ಯಾದ್ಯಂತ 1,745 ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ವಿಶೇಷ ಆಹ್ವಾನಿತರಾಗಿ ಆಹ್ವಾನಿಸಲಾಗಿದೆ ಎಂದು ತಿಳಿಸಿದರು.