ವಾಲ್ಮೀಕಿ ನಿಗಮದಲ್ಲಿ ನಡೆದ 187 ಕೋಟಿ ರೂ. ಅವ್ಯವಹಾರದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಬೆಂಗಳೂರಿನ ಸಿಎಂ ಸರ್ಕಾರಿ ನಿವಾಸ ಕಾವೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಂಡ ಬಿಜೆಪಿ ನಾಯಕರು ಬುಧವಾರ ಸಿಎಂ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಬಿಜೆಪಿ ನಾಯಕರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ.
ಕುಮಾರ ಕೃಪ ಅತಿಥಿ ಗೃಹದಿಂದ ಸಿಎಂ ನಿವಾಸಕ್ಕೆ ಮೆರವಣಿಗೆ ಮೂಲಕ ತೆರಳದ ಬಿಜೆಪಿ ನಾಯಕರು ಕಾವೇರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.
ಕುಮಾರಕೃಪ ಅತಿಥಿ ಗೃಹದ ಬಳಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಕುಮಾರ ಕೃಪದಿಂದ ಕಾವೇರಿ ನಿವಾಸದವರಿಗೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಸಿಎಂ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ನಾಯಕರು ಯತ್ನಿಸಿದಾಗ ಅವರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾದರು. ಈ ವೇಳೆ ಪೊಲೀಸರು ಹಾಗೂ ಬಿಜೆಪಿ ನಾಯಕರ ನಡುವೆ ವಾಗ್ವಾದ ನಡೆದಿದೆ.
ಮಾಜಿ ಸಚಿವ ಸುನಿಲ್ ಕುಮಾರ್ ಹಾಗೂ ಪೊಲೀಸ್ ಅಧಿಕಾರಿಳ ನಡುವೆ ವಾಗ್ವಾದ ನಡೆದಿದೆ. ಪ್ರತಿಭಟನೆ ನಿಲ್ಲಿಸಿದ್ದೇವೆ. ರಸ್ತೆಯಲ್ಲಿ ಹೋಗೊದಕ್ಕೆ ಬಿಡಿ ಎಂದು ಸುನಿಲ್ ಕುಮಾರ್ ಪೊಲೀಸರ ಮೇಲೆ ಹರಿಹಾಯ್ದರು.
ಈ ವೇಳೆ ಪೊಲೀಸರ ನಡುವೆ ವಾಗ್ವಾದ ಉಂಟಾಗಿದ್ದು, ಪೊಲೀಸರು ಸುನಿಲ್ ಕುಮಾರ್ ಹಾಗೂ ಶಾಸಕ ಸಿಕೆ ರಾಮಮೂರ್ತಿ ಅವರನ್ನು ವಶಕ್ಕೆ ಪಡೆದರು.
ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ಶಾಸಕರಾದ ಗೋಪಾಲಯ್ಯ, ಎಂಎಲ್ ಸಿ ಅರುಣ್ , ಭಾರತಿ ಶೆಟ್ಟಿ ಸೇರಿದಂತೆ ಹಲವರಿಂದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.