ಬೆಂಗಳೂರು : ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷಾ (ಜಾತಿ ಗಣತಿ) ವರದಿ ಜಾರಿಗೆ ಸಂಬಂಧಿ ಹಲವು ಮಂತ್ರಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಿದ್ದಾರೆ.
ಇನ್ನು ಕೆಲ ಸಚಿವರ ಅಭಿಪ್ರಾಯ ಪಡೆಯುವುದು ಬಾಕಿ ಇದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಅವರು ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಅವರು ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಇಂದಿನ ಸಭೆಯಲ್ಲಿ ಸಮೀಕ್ಷೆಯ ಕುರಿತಾಗಿ ಹಿಂದುಳಿದ ವರ್ಗಳ ಕಲ್ಯಾಣ ಸಚಿವರು ಕೆಲ ವರದಿಯಗಳನ್ನು ಮಂತ್ರಿಗಳಿಗೆ ಸಲ್ಲಿಸಿದ್ದಾರೆ. ಹೀಗಾಗಿ ಮುಂದಿನವಾರ ಈ ಬಗ್ಗೆ ಚರ್ಚಿಸಲು ಸಚಿವ ಸಂಪುಟ ಸಭೆ ನಿರ್ಣಯಿಸಿದೆ ಎಂದು ತಿಳಿಸಿದರು.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ವಿಶೇಷಚೇತನ ಅಧಿಕಾರಿ ನೌಕರರ ಮುಂಬಡ್ತಿ ವಿಚಾರವಾಗಿ ಗ್ರೂಪ್ ಎ, ಬಿ ವೃಂದದ ಕಿರಿಯ ಶ್ರೇಣಿ ನೌಕರರಿಗೆ ನೀಡುವ ಮುಂಬಡ್ತಿಯಲ್ಲಿ ಶೇ.4 ಮೀಸಲಾತಿ ಕಲ್ಪಿಸುವುದರ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ.
2025-26ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿಗಳ ಬಗ್ಗೆ ಸಂಪುಟದಲ್ಲಿ ಚರ್ಚಿಸಲಾಗಿದ್ದು, ಕೆಲ ಇಲಾಖೆಗಳಲ್ಲಿ ಕೌನ್ಸ್ಲಿಂಗ್ ಪ್ರಾರಂಭಿಸುವುದರ ಬಗ್ಗೆ ಸಿಎಂ ಸೂಚನೆ ನೀಡಿದ್ದಾರೆ.
ನಗರಾಭಿವೃದ್ಧಿ ಇಲಾಖೆ, ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ ಜಾರಿಗೆ ತರುವ ದಿನಾಂಕ ಹಾಗೂ ಹಾಲಿ ಇರುವ ಬಿಬಿಎಂಪಿ ಪ್ರದೇಶವನ್ನ ಗ್ರೇಟರ್ ಬೆಂಗಳೂರು ಪ್ರದೇಶವೆಂದು ಅಧಿಸೂಚನೆ ಹೊರಡಿಸುವುದರ ಬಗ್ಗೆ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಯಿತು. 15-5-2025ರಂದು ಈ ಬಗ್ಗೆ ಅಧಿಸೂಚನೆ ಹೊರಡಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಧಿಸೂಚನೆ ಹೊರಡಿಸಿದ ಬಳಿಕ ಕಾನೂನು ಜಾರಿಗೆ ಬರಲಿದೆ ಎಂದು ಪಾಟೀಲರು ಹೇಳಿದರು.