ಬೆಂಗಳೂರು: ಇಂದು ಮುಂಜಾನೆ ನಗರದ (Bengaluru) ಹೃದಯಭಾಗವಾದ ಕೆ.ಆರ್. ಸರ್ಕಲ್ (KR Circle) ಜಂಕ್ಷನ್ ಬಳಿ ನಡೆದ ಭೀಕರ ಬಿಎಂಟಿಸಿ ಬಸ್ (BMTC) ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಲು ಸಾರಿಗೆ ಸಚಿವ ಬೈರತಿ ಸುರೇಶ್ (Byrathi Suresh) ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಬಸ್ ಚಾಲಕ ಅಭಿಷೇಕ್ ಹಾಗೂ ಬಸ್ನಲ್ಲಿದ್ದ ಪ್ರಯಾಣಿಕರಾದ ಶರಣಮ್ಮ ಮತ್ತು ಭಾಗ್ಯ ಅವರಿಗೆ ಸದ್ಯ ಸೇಂಟ್ ಮಾರ್ಥಾಸ್ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆಗೆ ಖುದ್ದಾಗಿ ಭೇಟಿ ನೀಡಿದ ಸಾರಿಗೆ ಸಚಿವರು ಗಾಯಾಳುಗಳ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿದರು. ಇದೇ ವೇಳೆ ಮಾತನಾಡಿದ ಸಚಿವರು, ಈ ದುರ್ಘಟನೆಯಲ್ಲಿ ಗಾಯಗೊಂಡಿರುವ ಎಲ್ಲಾ ಪ್ರಯಾಣಿಕರ ಹಾಗೂ ಸಿಬ್ಬಂದಿಯ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮಹತ್ವದ ಪ್ರಕಟಣೆ ಹೊರಡಿಸಿದ್ದಾರೆ.
ಇಂದು ಬೆಳಗ್ಗೆ ನಡೆದ ಈ ಭೀಕರ ಅಪಘಾತದ ವೇಳೆ ಬಸ್ನ ಮುಂಭಾಗದಲ್ಲಿದ್ದ ಕಬ್ಬಿಣದ ಸರಳುಗಳು ಹಾಗೂ ಸೀಟುಗಳ ಮಧ್ಯೆ ಸಿಲುಕಿಕೊಂಡಿದ್ದ ಮಹಿಳಾ ಪ್ರಯಾಣಿಕರನ್ನು ಹೊರಗೆ ತರುವುದೇ ರಕ್ಷಣಾ ಸಿಬ್ಬಂದಿಗೆ ದೊಡ್ಡ ಸವಾಲಾಗಿತ್ತು. ಅಪಘಾತದ ತೀವ್ರತೆಗೆ ಯುವತಿಯ ಕಾಲು ಕಬ್ಬಿಣದ ಕಂಬಗಳ ನಡುವೆ ಭೀಕರವಾಗಿ ಸಿಲುಕಿ ಆಕೆ ನೋವಿನಿಂದ ಒದ್ದಾಡುತ್ತಿದ್ದಳು.
ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ರಕ್ಷಣಾ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಕಷ್ಟಪಟ್ಟು ಕಬ್ಬಿಣದ ಸಲಾಖೆಗಳನ್ನು ಕತ್ತರಿಸುವ ಮೂಲಕ ಯುವತಿಯನ್ನು ಅತ್ಯಂತ ಸುರಕ್ಷಿತವಾಗಿ ಹೊರಗೆ ತಂದು ರಕ್ಷಿಸಿದ್ದರು. ಇದರೊಂದಿಗೆ ತೀವ್ರವಾಗಿ ಗಾಯಗೊಂಡಿದ್ದ ಚಾಲಕ ಅಭಿಷೇಕ್ನನ್ನು ಕೂಡ ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸಾರ್ವಜನಿಕರ ಜೀವ ರಕ್ಷಣೆಗೆ ಮೊದಲ ಆದ್ಯತೆ ನೀಡಿರುವ ಸರ್ಕಾರ, ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಸೌಲಭ್ಯ ಕಲ್ಪಿಸುವಂತೆ ಆಸ್ಪತ್ರೆಯ ವೈದ್ಯರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಸದ್ಯ ಈ ಭೀಕರ ಅಪಘಾತಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆಯ ಉನ್ನತ ಅಧಿಕಾರಿಗಳು ತನಿಖೆ ಕೈಗೊಂಡಿದ್ದು, ಸಿಗ್ನಲ್ನಲ್ಲಿ ನಿಂತಿದ್ದ ವೋಲ್ವೋ ಬಸ್ಗೆ ಸಾಮಾನ್ಯ ಬಸ್ ಅತಿವೇಗವಾಗಿ ಬಂದು ಡಿಕ್ಕಿ ಹೊಡೆಯಲು ಚಾಲಕನ ನಿರ್ಲಕ್ಷ್ಯ ಕಾರಣವೇ ಅಥವಾ ಬ್ರೇಕ್ ಫೇಲ್ಯೂರ್ ಆಗಿತ್ತೇ ಎಂಬ ಅಸಲಿ ಸತ್ಯವನ್ನು ಪತ್ತೆಹಚ್ಚುತ್ತಿದ್ದಾರೆ.