Wednesday, August 19, 2026
Homeಟಾಪ್ ನ್ಯೂಸ್DK SHIVAKUMAR: ರಾಜ್ಯದಲ್ಲಿ ಮಳೆ ಕೊರತೆ, ಸದ್ಯಕ್ಕೆ ಬಿತ್ತನೆ ಮಾಡದಂತೆ ರೈತರಿಗೆ ಸಿಎಂ ಮನವಿ

DK SHIVAKUMAR: ರಾಜ್ಯದಲ್ಲಿ ಮಳೆ ಕೊರತೆ, ಸದ್ಯಕ್ಕೆ ಬಿತ್ತನೆ ಮಾಡದಂತೆ ರೈತರಿಗೆ ಸಿಎಂ ಮನವಿ

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿಯ ಕುರಿತಂತೆ ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರ ನೇತೃತ್ವದಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ (Cabinet Meeting) ನಡೆಯಿತು. ಸಭೆಯಲ್ಲಿ ರಾಜ್ಯದ ಬರದ ಸ್ಥಿತಿಗತಿಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿ, ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಸಿಎಂ ಅವರು ರೈತರಲ್ಲಿ ಬಿತ್ತನೆ ಕುರಿತಂತೆ ಮನವಿ ಮಾಡಿಕೊಂಡರು.

‘ಶೇಕಡಾ 40ರಷ್ಟು ಮಾತ್ರ ನೀರು ಸಂಗ್ರಹ’

ಇಂದು ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಖುದ್ದು ಸಭೆ ನಡೆಸಿ ಮಾಹಿತಿ ಪಡೆದುಕೊಂಡಿರುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ರಾಜ್ಯದ ಸದ್ಯದ ಪರಿಸ್ಥಿತಿ ಆತಂಕಕಾರಿಯಾಗಿದೆ. 178 ತಾಲೂಕುಗಳಲ್ಲಿ ಶೇಕಡಾ 60ರಷ್ಟು ಮಳೆ ಕೊರತೆ ಎದುರಾಗಿದೆ. ಇನ್ನು 158 ತಾಲೂಕುಗಳಲ್ಲಿ ಕೇವಲ ಸಾಧಾರಣ ಮಳೆಯಾಗುತ್ತಿದೆ. ಪ್ರಸ್ತುತ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಕೇವಲ ಶೇಕಡಾ 40ರಷ್ಟು ಮಾತ್ರ ನೀರು ಸಂಗ್ರಹವಿದ್ದು, ಈ ನೀರು ಕೇವಲ ಕುಡಿಯುವ ಉದ್ದೇಶಕ್ಕೆ ಮಾತ್ರ ನೆರವಾಗಲಿದೆ ಎಂದು ಸ್ಪಷ್ಟಪಡಿಸಿದರು.

ಜಲಾಶಯಗಳಿಗೆ ಇನ್ನು ಮುಂದೆ ನೀರು ಬಂದರೆ ಮಾತ್ರ ಕೃಷಿಗೆ ನೀರು ಹರಿಸುವ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಇಂತಹ ಪರಿಸ್ಥಿತಿಯಲ್ಲಿ ರೈತರು ಬೆಳೆ ಹಾಕಿ ನಂತರ ನೀರು ಬಿಡಿ ಎಂದು ಸರ್ಕಾರದ ಮೇಲೆ ಒತ್ತಡ ಹೇರುವುದು ಸರಿಯಲ್ಲ. ಆದ್ದರಿಂದ ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮಂಡ್ಯ ಭಾಗದ ರೈತರು ಬಿತ್ತನೆ ಕಾರ್ಯಕ್ಕೆ ಮುಂದಾಗಬಾರದು ಎಂದು ಮುಖ್ಯಮಂತ್ರಿಗಳು ಇದೇ ವೇಳೆ ಮನವಿ ಮಾಡಿದರು.

‘ಪ್ರತಿ ತಾಲೂಕಿಗೆ ತಲಾ 1 ಕೋಟಿ ರೂಪಾಯಿ’

ರಾಜ್ಯದ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗದಂತೆ ನೋಡಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದ ಮುಖ್ಯಮಂತ್ರಿ ಅವರು, ತುರ್ತಾಗಿ ಕುಡಿಯುವ ನೀರಿನ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ರಾಜ್ಯದ ಪ್ರತಿ ತಾಲೂಕಿಗೆ ಹೆಚ್ಚುವರಿ ತಲಾ 1 ಕೋಟಿ ರೂಪಾಯಿ ವಿಶೇಷ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: 15 ಸಾವಿರ ಶಿಕ್ಷಕರ ನೇಮಕಾತಿಗೆ ಸಿಎಂ ನೇತೃತ್ವದ ಸಚಿವ ಸಂಪುಟ ಸಭೆ ಹಸಿರು ನಿಶಾನೆ

ಹೆಚ್ಚಿನ ಸುದ್ದಿ

Change Language »
error: Content is protected !!