ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ (Congress) ಬಣ ಬಡಿದಾಟ, ಪವರ್ ಶೇರಿಂಗ್ (Power Sharing) ಹಾಗೂ ಬ್ರೇಕ್ಫಾಸ್ಟ್ ಮೀಟಿಂಗ್ (Breakfast Meeting) ನಡುವೆ ಡಿ.9 ರಂದು ನಡೆಯುವ ಶಾಸಕಾಂಗ ಪಕ್ಷದ ಸಭೆ (CLP Meeting) ಕರೆಯಲಾಗಿದ್ದು, ತೀವ್ರ ಕುತೂಹಲ ಹುಟ್ಟಿಸಿದೆ.
ಹೌದು.. ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಡಿ.9 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆಯನ್ನು ಕರೆಯಲಾಗಿದೆ. ಬೆಳಗಾವಿಯ ಖಾಸಗಿ ಹೋಟೆಲ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಂಗಳವಾರ ಸಂಜೆ 7 ಗಂಟೆಗೆ ಈ ನಿರ್ಣಾಯಕ ಸಿಎಲ್ಪಿ ಸಭೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಸ್ತುತ ಪಕ್ಷದೊಳಗೆ ಆರಂಭವಾಗಿರುವ ಪವರ್ ಶೇರಿಂಗ್ ಸಂಬಂಧಿತ ಗೊಂದಲದಿಂದಾಗಿ ಹಲವು ಕಾಂಗ್ರೆಸ್ ಶಾಸಕರು ಈಗಾಗಲೇ ಅಸಮಾಧಾನಗೊಂಡಿದ್ದಾರೆ. ಈ ಗೊಂದಲ ಶುರುವಾದ ನಂತರ ನಡೆಯುತ್ತಿರುವ ಮೊದಲ ಸಿಎಲ್ಪಿ ಸಭೆ ಇದಾಗಿದ್ದು, ಶಾಸಕರು ಈ ಸಭೆಯ ಮೂಲಕ ನಾಯಕತ್ವದ ಬಗ್ಗೆ ಸ್ಪಷ್ಟ ಮತ್ತು ಅಧಿಕೃತ ಮಾಹಿತಿಯನ್ನು ಪಡೆಯುವ ನಿರೀಕ್ಷೆಯಲ್ಲಿದ್ದಾರೆ.
ಇದನ್ನೂ ಓದಿ: ಮುಡಾ ಪ್ರಕರಣ ; ಮಹತ್ವದ ತೀರ್ಮಾನ ತೆಗೆದುಕೊಂಡ ಕೋರ್ಟ್
ಇನ್ನು ಸಭೆಯಲ್ಲಿ ಬೆಳಗಾವಿ ಅಧಿವೇಶನದ ಕಾರ್ಯತಂತ್ರದ ಬಗ್ಗೆ ಚರ್ಚಿಸುವುದು ಮುಖ್ಯ ಅಜೆಂಡಾ ಆಗಿದ್ದರೂ, ಇದೇ ಸಂದರ್ಭದಲ್ಲಿ ಆಂತರಿಕವಾಗಿ ತಲೆದೋರಿರುವ ‘ಪವರ್ ಶೇರಿಂಗ್ ಗೊಂದಲದ ಬಗ್ಗೆಯೂ ಮಹತ್ವದ ಚರ್ಚೆ ನಡೆಯುವ ಸಾಧ್ಯತೆಗಳಿವೆ.
ಇತ್ತೀಚೆಗೆ ನಡೆದ ಬ್ರೇಕ್ ಫಾಸ್ಟ್ ಪ್ಯಾಚಪ್ ನಂತರ ಶಾಸಕರು ತಮ್ಮ ನಾಯಕರೊಂದಿಗೆ ಒಟ್ಟಾಗಿ ಭಾಗವಹಿಸುತ್ತಿರುವ ಮೊದಲ ಸಭೆ ಇದಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಈ ಸಭೆಯಲ್ಲಿ ಎಲ್ಲಾ ಗೊಂದಲಗಳಿಗೆ ತೆರೆ ಎಳೆದು ಶಾಸಕರಿಗೆ ಸ್ಪಷ್ಟ ಸಂದೇಶ ರವಾನಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.
ಹೈಅಲರ್ಟ್: ಇನ್ನೊಂದೆಡೆ ಡಿಸೆಂಬರ್ 8ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ಹಿನ್ನೆಲೆ ಬೆಳಗಾವಿಯಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ದೆಹಲಿಯಲ್ಲಿ ಸಂಭವಿಸಿದ ಸ್ಫೋಟದ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆಯಿಂದ ಎಚ್ಚರಿಕೆಯ ಸಂದೇಶ ಬಂದ ಎಚ್ಚರಿಕೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗಳು ಹೈಅಲರ್ಟ್ ಆಗಿವೆ.
ಅಧಿವೇಶನ ವೇಳೆಗೆ 6ರಿಂದ 8 ಸಾವಿರ ಪೊಲೀಸರನ್ನು ನಿಯೋಜಿಸಲು ಸರ್ಕಾರ ತೀರ್ಮಾನಿಸಿದೆ. ಅಧಿವೇಶನದಲ್ಲಿ ಸಚಿವಾಲಯ ಸಿಬ್ಬಂದಿ ಸೇರಿದಂತೆ 12 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಭಾಗಿಯಾಗಲಿದ್ದಾರೆ ಎಂದು ಅಂದಾಜಿಸಲಾಗಿದೆ.
ಅಧಿವೇಶನ ಅವಧಿಯಲ್ಲಿ ಸುವರ್ಣ ಸೌಧ ಆವರಣದಲ್ಲಿ ಸಾಲು ಸಾಲು ಪ್ರತಿಭಟನೆಗಳು ಕೂಡ ನಡೆಯುತ್ತವೆ. ಹೀಗಾಗಿ ಪ್ರತಿದಿನ 50 ಸಾವಿರ ಜನ ಸೇರುವ ಸಾಧ್ಯತೆ ಇದೆ. ಆ ಸಂದರ್ಭದಲ್ಲಿ ಯಾವುದೇ ಅವಘಡವಾಗದಂತೆ ಪೊಲೀಸರು ಕಟ್ಟುನಿಟ್ಟಿನ ನಿಗಾ ವಹಿಸಿದ್ದಾರೆ. ಸುವರ್ಣ ವಿಧಾನಸೌಧದ ಸುತ್ತಮುತ್ತ 3 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ.