ಕೇರಳ : ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಏ .18 ರಂದು ದೇಶವನ್ನುದ್ದೇಶಿಸಿ ಮಾಡಿದ ಭಾಷಣ ರಾಜಕೀಯ ಪ್ರೇರಿತವಾಗಿದೆ ಮತ್ತು ಚುನಾವಣಾ ನೀತಿ ಸಂಹಿತೆಯ ಗಂಭೀರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಹಾಗೂ ಸಿಪಿಎಂ ಪಕ್ಷಗಳು ಕೇಂದ್ರ ಚುನಾವಣಾ ಆಯೋಗಕ್ಕೆ ಪ್ರತ್ಯೇಕ ದೂರು ನೀಡಿವೆ.
ಕೇರಳದ ಕಾಂಗ್ರೆಸ್ ನಾಯಕ ಅನಿಲ್ ಅಕ್ಕರ ಮತ್ತು ಸಿಪಿಎಂ ರಾಜ್ಯಸಭಾ ಸದಸ್ಯ ಪಿ. ಸಂತೋಷ್ ಕುಮಾರ್ ಅವರು ಈ ಸಂಬಂಧ ದೂರು ದಾಖಲಿಸಿದ್ದಾರೆ. ಪ್ರಧಾನಿಯವರು ತಮ್ಮ ರಾಜಕೀಯ ಭಾಷಣ ಪ್ರಸಾರ ಮಾಡಲು ಸರ್ಕಾರಿ ಸ್ವಾಮ್ಯದ ದೂರದರ್ಶನ ವಾಹಿನಿಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬುದು ಇವರ ಪ್ರಮುಖ ಆರೋಪವಾಗಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಸರ್ಕಾರಿ ಮಾಧ್ಯಮಗಳನ್ನು ಇಂತಹ ಉದ್ದೇಶಕ್ಕೆ ಬಳಸುವುದು ನಿಯಮಬಾಹಿರ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಭಾರತದ ನಾರೀಶಕ್ತಿಯನ್ನು ವಿರೋಧ ಪಕ್ಷಗಳು ಅಪಮಾನಿಸಿವೆ -ಪ್ರಧಾನಿ ನರೇಂದ್ರ ಮೋದಿ ನೇರ ಭಾಷಣ
ಮಹಿಳಾ ಮೀಸಲಾತಿ ಮಸೂದೆಯ ವಿಚಾರವನ್ನು ಮುಂದಿಟ್ಟುಕೊಂಡು ಪ್ರಧಾನಿಯವರು ವಿರೋಧ ಪಕ್ಷಗಳ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ ಎಂದು ದೂರುದಾರರು ದೂರಿದ್ದಾರೆ. ವಿಶೇಷವಾಗಿ ಕಾಂಗ್ರೆಸ್, ಡಿಎಂಕೆ, ಟಿಎಂಸಿ ಮತ್ತು ಎಸ್ಪಿ ಪಕ್ಷಗಳ ಹೆಸರನ್ನು ಪ್ರಸ್ತಾಪಿಸಿ ಟೀಕಿಸಿರುವುದು ಕೇವಲ ರಾಜಕೀಯ ಪ್ರಚಾರದ ಭಾಗವಾಗಿದೆ. ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಮೇ 6ರವರೆಗೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ಭಾಷಣವು ಮತದಾರರ ಮೇಲೆ ನೇರ ಪ್ರಭಾವ ಬೀರಲಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.
ಚುನಾವಣಾ ವ್ಯವಸ್ಥೆಯಲ್ಲಿ ಎಲ್ಲಾ ಪಕ್ಷಗಳಿಗೂ ಸಮಾನ ಅವಕಾಶವಿರಬೇಕು ಎಂಬ ನಿಯಮವನ್ನು ಪ್ರಧಾನಿಯವರು ಗಾಳಿಗೆ ತೂರಿದ್ದಾರೆ ಎಂದು ವಿರೋಧ ಪಕ್ಷಗಳು ಕಿಡಿಕಾರಿವೆ. ಸರ್ಕಾರದ ಅಧಿಕೃತ ವೇದಿಕೆಯನ್ನು ವಿರೋಧ ಪಕ್ಷಗಳ ಟೀಕೆಗೆ ಬಳಸಿಕೊಂಡಿರುವುದು ಶಿಷ್ಟಾಚಾರದ ಉಲ್ಲಂಘನೆಯಾಗಿದ್ದು, ಈ ಕೂಡಲೇ ಚುನಾವಣಾ ಆಯೋಗವು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮತ್ತು ಸಿಪಿಎಂ ನಾಯಕರು ಒತ್ತಾಯಿಸಿದ್ದಾರೆ.