ತೆಲಂಗಾಣದ (Telangana) ನಂತರ ರಾಜ್ಯದಲ್ಲಿಯೂ ಮಕ್ಕಳ ಸಾಮಾಜಿಕ ಜಾಲತಾಣ (Social Media) ಬಳಕೆಗೆ ನಿಯಂತ್ರಣ ತರಲು ಕಾಂಗ್ರೆಸ್ ಸರ್ಕಾರ (Congress) ಚಿಂತನೆ ನಡೆಸುತ್ತಿದೆ. ವಿಧಾನಸಭೆಯಲ್ಲಿ ಈ ವಿಷಯದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge), ಮಕ್ಕಳನ್ನು ಜಾಲತಾಣದ ಅತಿಯಾದ ಬಳಕೆಯಿಂದ ದೂರ ಇಡುವ ಉದ್ದೇಶದಿಂದ ಸರ್ಕಾರ ಡಿಜಿಟಲ್ ಡಿಟಾಕ್ಸ್ ಕಾರ್ಯಕ್ರಮಗಳಿಗೆ ಮುಂದಾಗಿದೆ ಎಂದು ತಿಳಿಸಿದರು.
ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ಬಿಜೆಪಿ ಸದಸ್ಯ ಸುರೇಶ್ ಕುಮಾರ್ ಮಾತನಾಡಿ, ಸಾಮಾಜಿಕ ಜಾಲತಾಣಗಳಿಂದ ಹಲವು ಸಮಸ್ಯೆಗಳು ಉಂಟಾಗುತ್ತಿವೆ. ಸಣ್ಣ ಮಕ್ಕಳು ಅನಗತ್ಯ ವಿಷಯಗಳನ್ನು ನೋಡುತ್ತಾ ಅದಕ್ಕೆ ಆಕರ್ಷಿತರಾಗುತ್ತಿದ್ದಾರೆ. ಇದನ್ನು ತಡೆಯಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಈ ವಿಷಯ ಗಂಭೀರವಾದದ್ದು ಎಂದು ಒಪ್ಪಿಕೊಂಡರು. ಮಕ್ಕಳ ಸಾಮಾಜಿಕ ಜಾಲತಾಣ ಬಳಕೆಗೆ ಕಡಿವಾಣ ಹಾಕುವ ಕುರಿತು ಫಿನ್ಲ್ಯಾಂಡ್, ಆಸ್ಟ್ರೇಲಿಯಾ ಮತ್ತು ಫ್ರಾನ್ಸ್ ದೇಶಗಳು ಈಗಾಗಲೇ ನಿರ್ಧಾರ ಕೈಗೊಂಡಿವೆ. ರಾಜ್ಯದಲ್ಲಿಯೂ ಸಾಮಾಜಿಕ ಜಾಲತಾಣವನ್ನು ಜವಾಬ್ದಾರಿಯುತವಾಗಿ ಬಳಸುವ ಬಗ್ಗೆ ಚರ್ಚೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಇದನ್ನೂ ಓದಿ : ಸಿದ್ದರಾಮಯ್ಯ ಇಳೀಬೇಕು ಎಂದಿದ್ದ ಸೋಷಿಯಲ್ ಮೀಡಿಯಾ ಸ್ಟಾರ್ ಗೆ ಜಿಬಿಎ ಟಿಕೆಟ್?
ಯುವಜನತೆ ಸಾಮಾಜಿಕ ಜಾಲತಾಣದಲ್ಲಿ ಅತಿಯಾಗಿ ತೊಡಗಿಸಿಕೊಂಡಿರುವುದು ಆತಂಕಕಾರಿ ವಿಷಯವಾಗಿದೆ. ಈ ಹಿನ್ನೆಲೆ ಕೆಲವು ದೇಶಗಳು ಸಾಮಾಜಿಕ ಮಾಧ್ಯಮ ಬಳಕೆಗೆ ನಿಯಮಗಳನ್ನು ಜಾರಿಗೆ ತಂದಿವೆ. ನಮ್ಮ ರಾಜ್ಯದಲ್ಲಿಯೂ ಇದೇ ರೀತಿಯ ಕ್ರಮಗಳ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದರು.
ಮಕ್ಕಳನ್ನು ಸಾಮಾಜಿಕ ಜಾಲತಾಣದಿಂದ ದೂರ ಇಡುವ ಉದ್ದೇಶದಿಂದ ಐಟಿ-ಬಿಟಿ ಇಲಾಖೆ ಮೆಟಾ ಸಂಸ್ಥೆಯ ಸಹಕಾರದೊಂದಿಗೆ ಡಿಜಿಟಲ್ ಡಿಟಾಕ್ಸ್ ಕಾರ್ಯಕ್ರಮವನ್ನು ನಡೆಸುತ್ತಿದೆ. ಈ ಕಾರ್ಯಕ್ರಮದಲ್ಲಿ ಈಗಾಗಲೇ 3 ಲಕ್ಷಕ್ಕೂ ಹೆಚ್ಚು ಮಕ್ಕಳು ಹಾಗೂ ಸುಮಾರು 1 ಲಕ್ಷ ಶಿಕ್ಷಕರು ಭಾಗವಹಿಸಿದ್ದಾರೆ. ಸಾಮಾಜಿಕ ಜಾಲತಾಣವನ್ನು ಹೆಚ್ಚು ಬಳಸಿದರೆ ಮಕ್ಕಳ ಭವಿಷ್ಯಕ್ಕೆ ಹಾನಿಯಾಗಬಹುದು. ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.