ಬೆಂಗಳೂರು : ಮಹತ್ವದ ಬೆಳವಣಿಗೆಯೊಂದರಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವ್ರನ್ನು (Mallikarjun Kharge) ಗೃಹ ಸಚಿವ ಡಾ. ಜಿ.ಪರಮೇಶ್ವರ್ (G Parameshwar) ಭೇಟಿಯಾಗಿದ್ದಾರೆ. ಈ ವೇಳೆ ಯಾವುದೇ ರಾಜಕೀಯ ಚರ್ಚೆ ನಡೆಸಿಲ್ಲ. ಇದೊಂದು ಸೌಹಾರ್ದ ಹಾಗೂ ಸೌಜನ್ಯದ ಭೇಟಿ ಎಂದು ಗೃಹ ಸಚಿವರು ಹೇಳಿದರು.
ಖರ್ಗೆಯವರನ್ನು ಬೆಂಗಳೂರಿನಲ್ಲಿಂದು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೌಜನ್ಯಕ್ಕಾಗಿ ಭೇಟಿ ಮಾಡಿದ್ದೇನೆ. ನನ್ನ ಮತ್ತು ಅವರ ಕುಟುಂಬದ ನಡುವೆ ರಾಜಕೀಯ ಮೀರಿದ ಸಂಬಂಧವಿದೆ. ಭೇಟಿಯ ಸಂದರ್ಭದಲ್ಲಿ ರಾಜ್ಯ ರಾಜಕೀಯದ ಕೆಲ ವಿಚಾರಗಳನ್ನು ಅವರ ಗಮನಕ್ಕೆ ತಂದಿದ್ದೇನೆ. ಕಲಬುರುಗಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿದೆ.
‘ನಮ್ಮದು ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಸಂಬಂಧ ಕುಟುಂಬದ ಸಂಬಂಧ. ಹಾಗಾಗಿ ಅವರು ಬೆಂಗಳೂರಿಗೆ ಬಂದಾಗಲೆಲ್ಲಾ ಭೇಟಿ ಮಾಡುತ್ತಾ ಇರುತ್ತೇನೆ. ರಾಜ್ಯದ ರಾಜಕಾರಣದ ವಿಚಾರಗಳನ್ನು ಅವರ ಗಮನಕ್ಕೆ ತಂದಿದ್ದೇನೆ ಅಷ್ಟೇ’ಎಂದರು.
ಸಮಸ್ಯೆ ಬಗೆಹರಿಸಲು ಬಜೆಟ್ ನಲ್ಲಿ ಪ್ರತ್ಯೇಕ ಅನುದಾನ ಮೀಸಲಿಡಬೇಕು ಎಂದು ಮುಖ್ಯಮಂತ್ರಿ ಅವರ ಜೊತೆಯೂ ಚರ್ಚೆ ಮಾಡಿದ್ದೇನೆ. ಖರ್ಗೆವರ ಗಮನಕ್ಕೂ ತಂದಿದ್ದೇನೆ. ಅದನ್ನು ಹೊರತುಪಡಿಸಿ ರಾಜ್ಯ ರಾಜಕೀಯದ ವಿಚಾರವಾಗಿ ಯಾವುದೇ ಚರ್ಚೆಗಳನ್ನು ಮಾಡಿಲ್ಲ. ಅಭಿವೃದ್ಧಿ ವಿಚಾರಗಳ ಬಗ್ಗೆ ಮಾತ್ರ ಮಾತನಾಡಿದ್ದೇನೆ ಎಂದಿದ್ದಾರೆ.
ನಾನು ಎಐಸಿಸಿ ಅಧ್ಯಕ್ಷರ ಜತೆ ಯಾವುದೇ ರಾಜಕೀಯ ವಿಷಯಗಳನ್ನು ಪ್ರಸ್ತಾಪ ಮಾಡಿಲ್ಲ. ರಾಜಕೀಯ ವಿಚಾರಗಳ ಚರ್ಚೆಯೂ ಆಗಿಲ್ಲ. ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇನೆ ಅಷ್ಟೇ ಎಂದರು.
ಕೇಂದ್ರ ಸರ್ಕಾರದ ಬಜೆಟ್ ಮಂಡನೆಯಲ್ಲಿ ರಾಜ್ಯಕ್ಕೆ ವಿಶೇಷ ಕೊಡುಗೆ ನೀಡಬೇಕೆಂಬುದು ನಮ್ಮ ಒತ್ತಾಯವಾಗಿದೆ. ಜಿಎಸ್ಟಿ ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ನ್ಯಾಯಯುತವಾದ ಪಾಲು ನೀಡಬೇಕು.
ಬಾಕಿಯನ್ನು ಪಾವತಿಸಬೇಕು ಮತ್ತು ಹೊಸದಾಗಿ ಕೊಡುವ ಪಾಲಿನಲ್ಲೂ ಹೆಚ್ಚಿನ ಪ್ರಮಾಣ ಸೇರ್ಪಡೆ ಮಾಡಬೇಕು ಎಂಬುದು ನಮ ನಿರೀಕ್ಷೆ. ಮನೆ ಮನೆಗೆ ಸಂಪರ್ಕ ಕಲ್ಪಿಸುವ ಜಲಜೀವನ್ ಮಿಷನ್ ಯೋಜನೆಯ ವೆಚ್ಚವನ್ನು ಶೇ.50ರಷ್ಟು ಅನುಪಾತದಲ್ಲಿ ಭರಿಸಬೇಕು. ಆ ಯೋಜನೆಗೆ ಈಗ ನಾವೇ ಹೆಚ್ಚಿನ ಹಣ ಖರ್ಚು ಮಾಡುತ್ತಿದ್ದೇವೆ. ಕೇಂದ್ರ ಸರ್ಕಾರ 13000 ಕೋಟಿಗಳನ್ನು ಬಾಕಿ ಉಳಿಸಿಕೊಂಡಿದೆ ಎಂದರು.
ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಬೂದಿಮುಚ್ಚಿದ ಕೆಂಡದಂತಿರುವಾಗಲೇ ಸಚಿವ ಡಾ. ಜಿ. ಪರಮೇಶ್ವರ್ ಅವರು ಎಐಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿರುವುದು ನಾನಾ ವ್ಯಾಖ್ಯಾನಗಳಿಗೆ ಕಾರಣವಾಗಿದೆ.
ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ.ಗಳನ್ನು ನೀಡುವುದಾಗಿ ಬಜೆಟ್ ನಲ್ಲಿ ಘೋಷಿಸಿದ್ದರು. ಅದು ಇದುವರೆಗೂ ಬಿಡುಗಡೆಯಾಗಿಲ್ಲ. ಇದರ ಜೊತೆಗೆ ದೇಶದ ಅಭಿವೃದ್ಧಿಯ ದೃಷ್ಟಿಯಿಂದ ಕರ್ನಾಟಕ ರಾಜ್ಯಕ್ಕೆ ವಿಶೇಷ ಕೊಡುಗೆಗಳನ್ನು ನೀಡಬೇಕು ಎಂದು ಹೇಳಿದರು.
‘ಪ್ರಾಥಮಿಕ ತನಿಖೆ ನಡೆಯುತ್ತಿದೆ’
ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆಗೆ ಸೂಚನೆ ನೀಡಿದ್ದೇವೆ ಅಂತಾ ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ಡಿಸೆಂಬರ್ನಲ್ಲಿ ಕಂಪನಿ ಮೇಲೆ ಐಟಿ ದಾಳಿ ನಡೆದಿತ್ತು. ಪ್ರಾಥಮಿಕ ಹಂತದ ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: ಸಿ.ಜೆ ರಾಯ್ ಆತ್ಮಹ*ತ್ಯೆ ಪ್ರಕರಣ! ಲಾಕರ್ ತೆಗಿ ಎಂದಿದ್ದಕ್ಕೆ ಸೂಸೈ*ಡ್? ಮೊಬೈಲ್ನಲ್ಲಿದ್ಯಾ ಸೀಕ್ರೆಟ್?