ನವದೆಹಲಿ : ಪಾಕಿಸ್ತಾನ ಪದೇ ಪದೇ ಕಿರಿಕ್ ಮಾಡುತ್ತಿದ್ದು, ಸೇನಾನೆಲೆಗಳು, ಏರ್ಪೋರ್ಟ್ಗಳನ್ನು ಗುರಿಯಾಗಿಸಿ ದಾಳಿ ಮಾಡುತ್ತಿದೆ. ಭಾರತದ ಐತಿಹಾಸಿಕ ಸ್ಮಾರಕಗಳನ್ನು ಗುರಿಯಾಗಿಸಿ ದಾಳಿ ಮಾಡುವ ಸಾಧ್ಯತೆಗಳಿವೆ.
ಆಗ್ರಾದ ತಾಜ್ಮಹಲ್, ದೆಹಲಿಯ ಕುತುಬ್ ಮಿನಾರ್, ಕೆಂಪುಕೋಟೆಗೆ ಬಿಗಿಭದ್ರತೆ ಒದಗಿಸಲಾಗಿದೆ.ಮಾಲ್, ಮಾರುಕಟ್ಟೆ, ಮೆಟ್ರೋ ನಿಲ್ದಾಣ, ಹೋಟೆಲ್, ವಸತಿ ಪ್ರದೇಶಗಳು ಮತ್ತು ಸಾರಿಗೆ ಕೇಂದ್ರಗಳಲ್ಲಿ ತಪಾಸಣೆ ನಡೆಯುತ್ತಿದೆ. ಪ್ರತಿ ಮೆಟ್ರೋ ನಿಲ್ದಾಣದಲ್ಲಿ ಹೆಚ್ಚುವರಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪ್ರತಿ ಶಿಫ್ಟ್ನಲ್ಲಿ ಏಳು ಪುರುಷ ಮತ್ತು ಇಬ್ಬರು ಮಹಿಳಾ ಸಿಐಎಸ್ಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಇಡೀ ರಾಜಧಾನಿಯಾದ್ಯಂತ ತಪಾಸಣೆ ನಡೆಸಿದೆ. ನೈಋತ್ಯ ಮಾಲ್, ಮಾರುಕಟ್ಟೆ, ಹೋಟೆಲ್ಗಳು ಮತ್ತು ಪ್ರಮುಖ ಸ್ಥಳಗಳಲ್ಲಿ ತಪಾಸಣೆ ನಡೆಸಲಾಗಿದೆ ಎಂದು ಡಿಸಿಪಿ ಸುರೇಂದ್ರ ಚೌಧರಿ ಹೇಳಿದ್ದಾರೆ.
ಇಂಡಿಯಾ ಗೇಟ್ ತಾತ್ಕಾಲಿಕ ಬಂದ್
ದೆಹಲಿಯಲ್ಲಿ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ಶಾಲೆಗಳನ್ನು ಮುಚ್ಚಲಾಗಿದೆ. ಇಂಡಿಯಾ ಗೇಟ್ಗೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಪ್ರವಾಸಿಗರು ಸದ್ಯಕ್ಕೆ ಇಂಡಿಯಾ ಗೇಟ್ಗೆ ಬರುವುದು ಬೇಡ ಎಂದು ನವದೆಹಲಿ ಡಿಸಿಪಿ ದೇವೇಶ್ ಮಹಾಲಾ ಹೇಳಿದ್ದಾರೆ.
ದೆಹಲಿ ಸರ್ಕಾರವು ತಕ್ಷಣದಿಂದಲೇ ಜಾರಿಗೆ ಬರುವಂತೆ ಸರ್ಕಾರಿ ನೌಕರರು, ಅಧಿಕಾರಿಗಳು, ಸಿಬ್ಬಂದಿಗಳಿಗೆ ನೀಡಲಾಗಿದ್ದ ಎಲ್ಲಾ ರಜೆಗಳನ್ನು ರದ್ದುಗೊಳಿಸಿದೆ. ಮುಂಬರುವ ದಿನಗಳಲ್ಲಿ ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸಿದ್ಧವಾಗಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪಂಜಾಬ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಹರಿಯಾಣ ಮತ್ತು ರಾಜಸ್ಥಾನದ ಗಡಿ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.