ಬೆಂಗಳೂರು : ರಾಜ್ಯದಲ್ಲಿ (Karnataka )ತಲೆದೂರಿರುವ ಬರಗಾಲದ ಆತಂಕದ ಮಧ್ಯೆ ಹವಾಮಾನ ಇಲಾಖೆಯು (Weather forecast ) ರೈತರಿಗೆ ಹಾಗೂ ಸಾರ್ವಜನಿಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಮತ್ತೆ ಎಲ್ಲೆಡೆ ಮಳೆ (Rain ) ಸುರಿಯಲಿದೆ
ಜುಲೈ 23ರ ವರೆಗೆ ರಾಜ್ಯಾದ್ಯಂತ ಜೋರಾದ ಗಾಳಿ, ಗುಡುಗು ಮತ್ತು ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ (KSNDMC) ತಿಳಿಸಿದೆ.
ವಿಶೇಷವಾಗಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ.
ತೀರ ಪ್ರದೇಶದಲ್ಲಿ ಬಿರುಗಾಳಿಯ ತೀವ್ರತೆ ಹೆಚ್ಚಿರಲಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲೂ ಮಳೆ ಅಬ್ಬರಿಸಲಿದೆ.
ಇತ್ತ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ. ಒಳನಾಡಿನ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಉಳಿದೆಡೆ ಸಾಮಾನ್ಯ ತಾಪಮಾನ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ.
ಇನ್ನು ರಾಜಧಾನಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಮುಂದಿನ ಐದು ದಿನಗಳ ಕಾಲ ಸಾಮಾನ್ಯವಾಗಿ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ. ಮುಸ್ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ನಗರದ ಹಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಕಳೆದ ಕೆಲವು ದಿನಗಳಿಂದ ಉಂಟಾಗಿದ್ದ ಉಷ್ಣಾಂಶ ಇಳಿಕೆಯಾಗಿ ವಾತಾವರಣ ತಂಪಾಗಲಿದೆ.
ಇದನ್ನೂ ಓದಿ : ಬರ ಪರಿಸ್ಥಿತಿ.. ಗುಳೆ ತಪ್ಪಿಸಲು ಜನರಿಗೆ ತಕ್ಷಣ ಉದ್ಯೋಗ ನೀಡಿ; ಸಿಇಒಗಳಿಗೆ ಡಿಸಿಎಂ ಸೂಚನೆ