ಬೆಂಗಳೂರು : ಕರ್ನಾಟಕದಲ್ಲಿ (Karnataka)ಮುಂಗಾರು ಪೂರ್ವ ಮಳೆ (Rain) ಚುರುಕಾಗಿದ್ದು, ಹವಾಮಾನ ಇಲಾಖೆಯು (Weather Forecast ) ರಾಜ್ಯದಾದ್ಯಂತ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯ ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಒಟ್ಟು 7 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ. ಬಿಸಿಲಿನ ಬೇಗೆಗೆ ಕಂಗೆಟ್ಟಿರೋ ಕರುನಾಡಿಗೆ ವರುಣ ತಂಪೆರೆಯಲಿದ್ದಾನೆ.
ಎಲ್ಲೆಲ್ಲಿ ಮಳೆ..?
ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭಾರಿ ಮಳೆಯ ನಿರೀಕ್ಷೆಯಿದ್ದು, ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಮೇ 19ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಹಾಗೆಯೇ ಬೆಳಗಾವಿ, ಬಾಗಲಕೋಟೆ, ಚಿಕ್ಕಮಗಳೂರು, ತುಮಕೂರು ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗಲಿದ್ದು, ಬೆಂಗಳೂರು, ಮಂಡ್ಯ, ಮೈಸೂರು ಭಾಗಗಳಲ್ಲಿ ಹಗುರ ಮಳೆಯಾಗಲಿದೆ. ಬಿರುಗಾಳಿ ಹಾಗೂ ಸಿಡಿಲು ಹೆಚ್ಚಿರುವುದರಿಂದ ಸಾರ್ವಜನಿಕರು ಮತ್ತು ರೈತರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಕೋರಿದೆ.