ಕೆಪಿಸಿಸಿ (KPCC) ಅಧ್ಯಕ್ಷರ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿವೆ ಎಂಬ ಮಾತುಗಳು ಕೇಳಿಬರುತ್ತಿದ್ದರೂ, ಪ್ರಸ್ತುತ ಯಾವುದೇ ಹಂತದಲ್ಲೂ ನಾಯಕತ್ವ ಬದಲಾವಣೆ ವಿಚಾರ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಚರ್ಚೆ ಆಗುತ್ತಿದೆ ಅಷ್ಟೇ, ಆದರೆ ಯಾವಾಗ ಎಂಬುದು ಯಾರಿಗೂ ಗೊತ್ತಿಲ್ಲ. ಇವತ್ತೂ ಇಲ್ಲ, ನಾಳೆಯೂ ಇಲ್ಲ, ಮುಂದೆಯೂ ಇಲ್ಲ. ನಮ್ಮ ಹಂತದಲ್ಲಿ ಯಾವುದೂ ಆಗುವುದಿಲ್ಲ. ಅಂತಿಮ ತೀರ್ಮಾನ ಹೈಕಮಾಂಡ್ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಮುಖ್ಯಮಂತ್ರಿ ಎಷ್ಟು ದಿನ ಇರ್ತಾರೆ ಎಂಬ ಹೇಳಿಕೆಗಳ ಕುರಿತು ಪ್ರತಿಕ್ರಿಯಿಸಿದ ಸಚಿವರು, ಇಂತಹ ಮಾತುಗಳನ್ನು ಎಲ್ಲರೂ ಸಾಮಾನ್ಯವಾಗಿ ಹೇಳುತ್ತಾರೆ. ಇದು ಹೊಸದೇನಲ್ಲ, ಪ್ರಾಕ್ಟೀಸ್ ಆಗಿದೆ. ಆದರೆ ಸದ್ಯದ ಸಿಎಂ ಬದಲಾವಣೆ ಇಲ್ಲ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.
ಇನ್ನು ಇದೇ ವೇಳೆ ಡಿಕೆ ಶಿವಕುಮಾರ್ ಅಸ್ಸಾಂ ವೀಕ್ಷಕರಾಗಿ ನೇಮಕ ಮಾಡಿದ ವಿಚಾರದ ಬಗ್ಗೆ ಸತೀಶ್ ಜಾರಕಿಹೊಳಿ, ಡಿಕೆ ಶಿವಕುಮಾರ್ ಗೆ ವೀಕ್ಷಕರ ಜವಾಬ್ದಾರಿ ನೀಡಲಾಗಿದೆ. ಬೇರೆಯವರಿಗೂ ಉಸ್ತುವಾರಿ ನೀಡಲಾಗಿದೆ. ಚುನಾವಣೆ ಮುಗಿಯುವವರೆಗೆ ಅವರು ಅಲ್ಲೇ ಇರಬೇಕಾಗುತ್ತದೆ ಎಂದು ಹೇಳಿದರು.
ಡಿಕೆ ಶಿವಕುಮಾರ್ ಹಸ್ತಕ್ಷೇಪದ ಬಗ್ಗೆ ಹೆಚ್ಡಿ ಕುಮಾರಸ್ವಾಮಿ ಆರೋಪಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅಲ್ಲಿ ಹೋದಾಗ ಸಭೆ ಮಾಡಿರಬಹುದು. ಸಚಿವರಾಗಿರದಿದ್ದರೂ ಸಭೆ ಮಾಡಿರಬಹುದು. ಅದನ್ನು ತಪ್ಪು ಎಂದು ಹೇಗೆ ಹೇಳಬಹುದು? ಅವರ ಜಾಗದಲ್ಲಿ ಯಾರೇ ಇದ್ದರೂ ಹಾಗೇ ಮಾಡುತ್ತಿದ್ದರು. ಕುಮಾರಸ್ವಾಮಿ ಅವರ ಹೇಳಿಕೆಗೆ ಬೇರೆ ವ್ಯಾಖ್ಯಾನ ಇರಬಹುದು ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಇದನ್ನೂ ಓದಿ : ಮನರೇಗಾ ಯೋಜನೆ ಬಗ್ಗೆ ಸಾರ್ವಜನಿಕ ಚರ್ಚೆಗೆ ಬರಲಿ – ಪ್ರಲ್ಹಾದ್ ಜೋಷಿಗೆ ಡಿಕೆಶಿ ಸವಾಲ್!
ಕನ್ನಡ ಶಾಲೆಗಳಲ್ಲಿ ಮಲೆಯಾಳಂ ಪಠ್ಯ ಸಂಬಂಧಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ವಿಷಯಕ್ಕೆ ನಮ್ಮ ಸರ್ಕಾರ ಮೊದಲ ಆದ್ಯತೆ ನೀಡಬೇಕು. ಸಿಎಂ ಅವರು ಕೇವಲ ಟ್ವೀಟ್ಗೆ ಸೀಮಿತವಾಗದೇ, ಕೇರಳ ಸರ್ಕಾರದ ಜೊತೆ ಮಾತನಾಡುತ್ತಾರೆ ಎಂದು ಹೇಳಿದರು.
ಇನ್ನು ನರೇಗಾ ಯೋಜನೆಯಲ್ಲಿ ರಾಜ್ಯಕ್ಕೆ ಶೇ. 40 ಮತ್ತು ಕೇಂದ್ರಕ್ಕೆ ಶೇ. 60 ಹಣ ಹಂಚಿಕೆ ಮಾಡುವ ವ್ಯವಸ್ಥೆಗೆ ವಿರೋಧ ವ್ಯಕ್ತಪಡಿಸಿದ ಜಾರಕಿಹೊಳಿ, ರಾಜ್ಯ ಸರ್ಕಾರ ಯಾಕೆ 40% ಕೊಡಬೇಕು? ದೆಹಲಿಯಲ್ಲಿ ಕುಳಿತು ಕೆಲಸ ಹೇಳ್ತಾರೆ ಅಂದ್ರೆ ಹೇಗೆ? ಬಹಳಷ್ಟು ಬಿಜೆಪಿ ನಾಯಕರೇ ಈ ವ್ಯವಸ್ಥೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಎಲ್ಲರಿಗೂ ಅನುಕೂಲವಾಗುವ ವ್ಯವಸ್ಥೆ ಆಗಬೇಕು ಎಂಬುದು ನಮ್ಮ ನಿಲುವು ಎಂದು ತಿಳಿಸಿದರು.
ಇದೇ ವೇಳೆ ಬೆಳಗಾವಿ ಬಾಯ್ಲಾರ್ ದುರಂತ ಪ್ರಕರಣದ ಕುರಿತು ಮಾತನಾಡಿದ ಜಾರಕಿಹೊಳಿ, ಪ್ರತಿ ಮೃತರಿಗೆ ₹20 ಲಕ್ಷ ಪರಿಹಾರ ಘೋಷಿಸಲಾಗಿದೆ. ಪರಿಹಾರದ ಜೊತೆಗೆ ಕಾರ್ಮಿಕ ವಿಮಾ ಯೋಜನೆಯ ಹಣವೂ ದೊರೆಯಲಿದೆ. ನಮ್ಮ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕುಟುಂಬಗಳ ಜೊತೆ ಮಾತನಾಡಿದ್ದಾರೆ ಎಂದು ಹೇಳಿದರು.