ದಾವಣಗೆರೆ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವೀರಶೈವ ಲಿಂಗಾಯತ ಸಮಾಜದ ಬಗ್ಗೆ ಕೀಳುಮಟ್ಟದ ಹೇಳಿಕೆಯನ್ನು ನೀಡುವುದನ್ನು ತಕ್ಷಣ ನಿಲ್ಲಿಸಬೇಕು. ಇಲ್ಲವಾದರೆ ನಿಮ್ಮನ್ನು ಹಾಳು ಬಾವಿಗೆ ನೂಕುವುದು ಸಮಾಜಕ್ಕೆ ಗೊತ್ತಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಯತ್ನಾಳ್ ಅವರು ಬಸವಣ್ಣನವರ ಕುರಿತು ನೀಡಿದ ಹೇಳಿಕೆಯನ್ನು ಖಂಡಿಸಿ ಶಿವಶಂಕರಪ್ಪ ಪ್ರಕಟಣೆಯಲ್ಲಿ ಕಿಡಿಕಾರಿದ್ದಾರೆ. ಸಮುದಾಯದ ಬಾಂಧವರು ಎಂಬ ಕಾರಣಕ್ಕೆ ನಿಮ್ಮ ಹುಚ್ಚಾಟವನ್ನು ಸಹಿಸಿಕೊಂಡಿದ್ದೆವು. ಇಂತಹ ಹುಚ್ಚಾಟಗಳಿಗೆ ಇತಿಶ್ರೀ ಹಾಡುತ್ತೀರೆಂದು ಭಾವಿಸುತ್ತೇವೆ. ಇಲ್ಲವಾದರೆ ಸಮಾಜವೇ ಇದಕ್ಕೆ ಕಡಿವಾಣ ಹಾಕುತ್ತದೆ ಎಂದಿದ್ದಾರೆ.
ಯತ್ನಾಳ್ ಅವರ ಹೇಳಿಕೆಗಳನ್ನು ಗಮನಿಸಿದರೆ ಅವರು ವೀರಶೈವ ಲಿಂಗಾಯತರೇ ಎಂಬ ಅನುಮಾನ ಮೂಡುತ್ತದೆ. ವೀರಶೈವ ಲಿಂಗಾಯತರಿಗೆ ಇರಬೇಕಾದ ಆಚಾರ, ಸಂಸ್ಕಾರ ಅವರಲ್ಲಿ ಕಾಣದಿರುವುದು ದುರದೃಷ್ಟಕರ. ಅಗ್ಗದ ಪ್ರಚಾರ ಹಾಗೂ ರಾಜಕೀಯ ತೆವಲಿಗೆ ಇಂತಹ ಕೀಳು ಮಟ್ಟದ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.