ಆಡಳಿತಾರೂಢ ಪಕ್ಷಗಳು ಅಧಿಕಾರಿಗಳನ್ನೂ ಸಹ ತಮ್ಮ ರಾಜಕೀಯ ಕಾರ್ಯಸಾಧನೆಗೆ ಬಳಸಿಕೊಳ್ಳುತ್ತಿದ್ದು, ಚುನಾವಣಾ ಆಯೋಗವು ನ್ಯಾಯೋಚಿತವಾಗಿ ವರ್ತಿಸಬೇಕೆಂಬುದು ನಮ್ಮ ನಿರೀಕ್ಷೆಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಬುಧವಾರ ಪತ್ರಕರ್ತರೊಡನೆ ಮಾತಾಡಿದ ಅವರು, ಕೆಲವೆಡೆ ತಮಗೆ ಬೇಕಾದ ಪೊಲೀಸ್ ಅಧಿಕಾರಿಗಳನ್ನೇ ಚುನಾವಣಾಧಿಕಾರಿಗಳಾಗಿ ನೇಮಿಸುವುದೂ ಸಹ ನಡೆಯುತ್ತದೆ ಎಂದಿದ್ದಾರೆ.
ಕರ್ನಾಟಕ ರಾಜ್ಯ ಚುನಾವಣೆಯಲ್ಲಿ ಹಣ, ತೋಳ್ಬಲ ಮತ್ತು ಮದ್ಯದ ಪರಿಣಾಮವನ್ನು ತಡೆಯುವುದು ಸವಾಲಿನ ಕೆಲಸವಾಗಿದೆ. ಹಾಗೂ ಅದಕ್ಕಾಗಿಯೇ 300 ಅಧಿಕಾರಿಗಳನ್ನು ನೇಮಿಸಲಾಗಿದೆ ಎಂಬ ಚುನಾವಣಾ ಆಯೋಗದ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ಇದು ಕಾಂಗ್ರೆಸ್ನ್ನು ಕಟ್ಟಿಹಾಕುವ ಪ್ರಯತ್ನವಾಗಿದೆ. ಕೆಲವೊಮ್ಮೆ ಪಕ್ಷಗಳು ಉಪಚುನಾವಣೆಯಲ್ಲೇ 25-30 ಕೋಟಿ ರೂ. ಹಣ ಸುರಿಯುತ್ತದೆ. ಆದರೂ ಯಾರೂ ಪ್ರಶ್ನಿಸುವುದಿಲ್ಲ ಎಂದಿದ್ದಾರೆ.
ಇಡೀ ಚುನಾವಣಾ ವ್ಯವಸ್ಥೆಯನ್ನು ಭ್ರಷ್ಟಗೊಳಿಸಿದ್ದೇ ಬಿಜೆಪಿ ಸರ್ಕಾರ ಎಂದು ಆರೋಪಿಸಿದ ಸಿದ್ದರಾಮಯ್ಯ, ಆಪರೇಷನ್ ಕಮಲ ಎಂಬ ಪದವನ್ನು ದೇಶದಲ್ಲಿ ಸೃಷ್ಟಿಸಿದ್ದು ಯಾರು? ಎಂದು ಪ್ರಶ್ನಿಸಿದರು. .
ಚುನಾವಣೆಯನ್ನು ಒಂದೇ ಹಂತದಲ್ಲಿ ಮುಗಿಸುತ್ತಿರುವ ಕ್ರಮವನ್ನು ಸ್ವಾಗತಿಸಿದ ಸಿದ್ದರಾಮಯ್ಯ, ಚುನಾವಣಾ ಪ್ರಚಾರಕ್ಕೆ ರಾಹುಲ್ ಗಾಂಧಿ ರಾಜ್ಯಕ್ಕೆ ಬರಲಿದ್ದಾರೆ ಎಂದರು.