ಮಂಗಳೂರು : ನಮ್ಮ ಕರ್ನಾಟಕ ಒಂದು ವಿಶೇಷ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದೆ. ಕಾಮನ್ ವೆಲ್ತ್ ಸಂಸದೀಯ ಸಂಘದ ಅಖಿಲ ಭಾರತ ಮಟ್ಟದ ಸ್ಪೀಕರ್ಗಳ ಸಮಾವೇಶವನ್ನು ಸೆಪ್ಟೆಂಬರ್ 8ರಿಂದ 10ರವರೆಗೆ ಬೆಂಗಳೂರಿನಲ್ಲಿ ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಕರ್ನಾಟಕಕ್ಕೆ ಈ ಸಮ್ಮೇಳನದ ಆತಿಥ್ಯ ವಹಿಸುವ ಅವಕಾಶ ದೊರೆತಿದೆ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ.
ಮಂಗಳೂರಲ್ಲಿ ಮಾತಾಡಿದ ಅವರು, ಬೆಂಗಳೂರಿನಲ್ಲಿ ಒಂದೆರಡು ಸ್ಥಳಗಳನ್ನು ಗುರುತಿಸಲಾಗಿದ್ದು, ಆ ಸ್ಥಳಗಳ ಪೈಕಿ ಒಂದನ್ನು ಆಯ್ಕೆ ಮಾಡಲಾಗುವುದು. ಸೆಪ್ಟೆಂಬರ್ 11ರಂದು, ಸಮ್ಮೇಳನದಲ್ಲಿ ಭಾಗವಹಿಸುವ ಸ್ಪೀಕರ್ಗಳಿಗೆ ರಾಜ್ಯ ಪ್ರವಾಸಕ್ಕೆ ಕರೆದೊಯ್ಯಲು ಚಿಂತನೆ ನಡೆದಿದೆ. ಮೈಸೂರು, ಮಂಗಳೂರು ಹಾಗೂ ಬೇಲೂರು-ಹಳೆಬೀಡು ಪೈಕಿ ಯಾವುದಾದರೂ ಒಂದು ಸ್ಥಳವನ್ನು ತೋರಿಸುತ್ತೇವೆ ಎಂದಿದ್ದಾರೆ.
ಸಮ್ಮೇಳನಕ್ಕೆ ಕರ್ನಾಟಕ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ. ವಿಧಾನಸಭೆ ಸ್ಪೀಕರ್ ಮತ್ತು ವಿಧಾನ ಪರಿಷತ್ ಸಭಾಪತಿ ನೇತೃತದಲ್ಲಿ ಈ ಸಮ್ಮೇಳನ ನಡೆಯಲಿದೆ. ದೇಶದ ಎಲ್ಲ ರಾಜ್ಯಗಳ ಸ್ಪೀಕರ್ ಹಾಗೂ ಉಪ ಸ್ಪೀಕರ್ಗಳು, ವಿಧಾನ ಪರಿಷತ್ನ ಸಭಾಪತಿ, ಉಪ ಸಭಾಪತಿಗಳು, ಕಾರ್ಯದರ್ಶಿಗಳು, ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಪ್ರಜಾಪ್ರಭುತ್ವ ಬಲಿಷ್ಠ ಗೊಳಿಸುವುದು, ಪ್ರಜಾಪ್ರಭುತ್ವದಲ್ಲಿ ಸ್ಪೀಕರ್ಗಳ ಪಾತ್ರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಮ್ಮೇಳನದಲ್ಲಿ ಚರ್ಚೆ ನಡೆಸಲಾಗುತ್ತದೆ. ಸೆಪ್ಟೆಂಬರ್ 8 ರಂದು ಸಂಜೆ 6.30ಕ್ಕೆ ವಿಧಾನಸೌಧದಲ್ಲಿ ಲೋಕಸಭೆ ಸ್ಪೀಕರ್ ಉಪಸ್ಥಿತಿಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮೇಳನಕ್ಕೆ ಚಾಲನೆ ನೀಡುತ್ತಾರೆ. ಉದ್ಘಾಟನೆ ಮತ್ತು ಸಮಾರೋಪ ಕಾರ್ಯಕ್ರಮಗಳಿಗೆ ಶಾಸಕರನ್ನು ಆಹ್ವಾನಿಸಲಾಗುವುದು ಎಂದು ಸ್ಪೀಕರ್ ಖಾದರ್ ಹೇಳಿದ್ದಾರೆ