ತೆಲಂಗಾಣ: ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಬಂದಿರುವ ಹಿನ್ನೆಲೆಯಲ್ಲಿ ಸರಕಾರ ರಚನೆ ಮಾಡಲು ತಮಗೆ ಅನುಮತಿ ನೀಡಬೇಕೆಂದು ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷದ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಾಣಿಕ್ಕಮ್ ಟಾಗೂರ್, ಡಿಸಿಎಂ ಡಿ ಕೆ ಶಿವಕುಮಾರ್, ತೆಲಂಗಾಣ ಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿ, ಹಿರಿಯ ಮುಖಂಡ ಉತ್ತಮ್ ರೆಡ್ಡಿ ಮತ್ತಿತರರು ರಾಜ್ಯಪಾಲರಾದ ತಮಿಳ್ ಸೆಲ್ವಿ ಅವರನ್ನು ಹೈದರಾಬಾದ್ ರಾಜಭವನದಲ್ಲಿ ಭಾನುವಾರ ರಾತ್ರಿ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.
ಹೈದರಾಬಾದ್ ನಲ್ಲಿ ಸೋಮವಾರ ಬೆಳಗ್ಗೆ ನಡೆಯುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಲ್ಪಿ ನಾಯಕನ ಆಯ್ಕೆ ಆಗಲಿದ್ದು, ಅವರು ಮತ್ತೊಮ್ಮೆ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಪ್ರತಿಪಾದಿಸಿ, ಪ್ರಮಾಣ ವಚನ ಸ್ವೀಕಾರಕ್ಕೆ ಸಮಯ ನಿಗದಿ ಮಾಡುವಂತೆ ಕೋರಿಕೆ ಸಲ್ಲಿಸಲಿದ್ದಾರೆ.
ತೆಲಂಗಾಣ ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹೊಸದಾಗಿ ಆಯ್ಕೆಯಾದ 65 ಶಾಸಕರೊಂದಿಗೆ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದೇವೆ. ಸೋಮವಾರ ಬೆಳಗ್ಗೆ 9.30ಕ್ಕೆ ಎಲ್ಲ ಶಾಸಕರ ಸಭೆ ಕರೆದಿದ್ದೇವೆ. ಕಾಂಗ್ರೆಸ್ ಪಕ್ಷದಲ್ಲಿ ನಮಗೆ ಒಂದು ಕಾರ್ಯವಿಧಾನವಿದೆ, ನಾವು ಅದನ್ನು ಅನುಸರಿಸುತ್ತೇವೆ ಎಂದರು.
ಒಟ್ಟು 119 ವಿಧಾನಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ 65 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ತೆಲಂಗಾಣದಲ್ಲಿ ಅಧಿಕಾರ ರಚನೆಯತ್ತ ದಾಪುಗಾಲು ಇಟ್ಟಿದೆ. ಆಡಳಿತರೂಢ ಬಿಆರ್ಎಸ್ ಕೇವಲ 39 ಸ್ಥಾನಗಳಿಗೆ ಕುಸಿದಿದೆ. ಬಿಜೆಪಿ 8 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ತಮ್ಮ ಖ್ಯಾತಿಯನ್ನು ಹೆಚ್ಚಿಸಿಕೊಳ್ಳುತ್ತಿದೆ.