ಬೆಂಗಳೂರು: ಐಶ್ವರ್ಯಾ ಗೌಡ ವಂಚನೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಕಾಯಿದೆ ಅಡಿ ತಮಗೆ ಸಮನ್ಸ್ ಜಾರಿ ಮಾಡಿರುವುದಕ್ಕೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ತಡೆಯಾಜ್ಞೆ ಕೋರಲು ಮುಂದಾಗಿದ್ದು, ಇದಕ್ಕೆ ಪ್ರತಿಯಾಗಿ ಜಾರಿ ನಿರ್ದೇಶನಾಲಯ ವಿರೋಧ ವ್ಯಕ್ತಪಡಿಸಿದೆ.
ಈ ಕುರಿತು ಸಮನ್ಸ್ ಗೆ ತಡೆಯಾಜ್ಞೆ ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿರುವ ಅರ್ಜಿಯನ್ನು ಇಂದು (ಮೇ 13) ವಿಚಾರಣೆ ನಡೆಸಲಾಯಿತು.ಈ ವೇಳೆ ಜಾರಿ ನಿರ್ದೇಶನಾಲಯದ ಪರ ವಕೀಲ ಕೆ ಅರವಿಂದ್ ಕಾಮತ್ ಇ.ಡಿ ಮಧ್ಯಂತರ ಪರಿಹಾರ ನೀಡುವುದನ್ನು ಪರಿಗಣಿಸುವುದಾದರೆ ನಮ್ಮ ವಾದವನ್ನು ಆಲಿಸಬೇಕು ಎಂದು ವಾದಿಸಿದ್ದಾರೆ.
ಇನ್ನು ವಿನಯ ಕುಲಕರ್ಣಿ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಹಾಜರಾಗಿ ಅಪರಾಧ ಪ್ರಕ್ರಿಯೆ ಇಲ್ಲದಿದ್ದರೂ ಪಿಎಂಎಲ್ಎ ಅಡಿ ವಿನಯ್ಗೆ ಸಮನ್ಸ್ ಜಾರಿ ಮಾಡಿರುವುದು ಕಾನೂನು ಬಾಹಿರ ಕ್ರಮ ಎಂದು ವಾದಿಸಿದ್ದಾರೆ. ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಮೇ 15ಕ್ಕೆ ಆದೇಶ ಕಾಯ್ದಿರಿಸಿದೆ.